ಹೇಮಾಂತರಂಗ: ನಾ ಕಂಡ ಸ್ವಾತಂತ್ರ್ಯ ದಿನ
Posted on: August 17, 2009
- ಹೇಮಾ ಪವಾರ್, ಬೆಂಗಳೂರು
ಸ್ವಾತಂತ್ರ್ಯದ ದಿನದಲ್ಲಿ ಬರೆಯಬಹುದಾದ ಮಾಡಬಹುದಾದ ವಿಷಯಗಳು ನನಗೆ
ಸ್ಪಷ್ಟವಾಗಿಲ್ಲವಾದರೂ ಈ ಸಲದ ಸ್ವಾತಂತ್ರ್ಯ ದಿನ ನನ್ನ ಪಾಲಿಗೆ ಅತಿ ಮುಖ್ಯ ದಿನ
ಎನಿಸಿದ್ದರಿಂದ ಬರೆಯುತ್ತಿದ್ದೇನೆ. ಮೊದಲೆಲ್ಲಾ ಇತರೆ ರಜದ ದಿನಗಳ ಹಾಗೆ
ಸ್ವಾತಂತ್ರ್ಯದಿನಾಚರಣೆಯೂ ಮುಗಿದು ಹೋಗುತ್ತಿತ್ತು ಮತ್ತು ಹಾಗೆ ಕಳೆದುಬಿಟ್ಟಿದ್ದರ
ಬಗ್ಗೆ ಸಣ್ಣದೊಂದು ಗಿಲ್ಟ್ ಮನಸಲ್ಲುಳಿದುಬಿಡುತ್ತಿತ್ತು, ಈ ಸಲ ಹಾಗಾಗಲಿಲ್ಲವೆಂಬುದೇ
ಖುಷಿಯ ವಿಚಾರ. ನಾನು ಬೆಳ್ಳಂಬೆಳಿಗ್ಗೆ ಎದ್ದು ರೆಡಿಯಾಗಿ ಸ್ಯಾಟಲೈಟ್ ಬಸ್ಟಾಪ್
ತಲುಪಿಕೊಂಡು, ಇಡ್ಲಿ ತಿಂದು, ಬಿಸೀ ಬಿಸಿ ಕಾಫಿ ಕಪ್ ಹಿಡಿದು ವಾಚ್ ನೋಡಿಕೊಂಡಾಗ ಸಮಯ
ಆರುಗಂಟೆ. ಅಲ್ಲಿಂದ ನನ್ನ ಪಯಣ ಸಾಗಿದ್ದು ಮದ್ದೂರಿನ ಹತ್ತಿರವಿರುವ ನಂಬಿನಾಯಕನಹಳ್ಳಿ
ಎಂಬ ಗ್ರಾಮಕ್ಕೆ. ಹಳ್ಳಿಗಳು ನನಗೇ ಪ್ರತಿ ವಿಷಯದಲ್ಲೂ ವಿಸ್ಮಯದ ಸಂತೆ, ದೊಡ್ಡ ದೊಡ್ಡ
ಹೆಂಚಿನ ಮನೆಗಳು, ಮನೆಯಲ್ಲೇ ಸಾಕಿರುವ ರೇಷ್ಮೆ ಹುಳುಗಳು, ಆಡು, ಕುರಿ, ಹಸು, ಎತ್ತು,
ಎಮ್ಮೆ, ಕೋಳಿ ಮತ್ತು ಅವೆಲ್ಲಕ್ಕೂ ಮನೆಮಂದಿ ಮಾಡುವ ಆರೈಕೆ, ಹಳ್ಳಿಯ ನಿರ್ಮಲ ಗಾಳಿ,
ಹಸಿರು ಎಲ್ಲವೂ ಬೆಂಗಳೂರಿನ ಕಾಂಕ್ರೀಟ್ ಕಾಡಿನಲ್ಲಿ ಹುಟ್ಟಿ ಬೆಳೆದ ನನಗೆ ಒಂದು
ಅಪೂರ್ವ ಸೆಳೆತವನ್ನುಂಟು ಮಾಡುತ್ತದೆ. ಅಲ್ಲಿನ ಪರಿಚಿತರ ಮನೆ ಹೊಕ್ಕು ಎಲ್ಲರನ್ನು
ಮಾತಾಡಿಸುತ್ತಿದ್ದಾಗಲೇ ಟಿ.ವಿಯಲ್ಲಿ ಬರುತ್ತಿದ್ದ ಕಾರ್ಯಕ್ರಮವೊಂದು ಗಮನ ಸೆಳೆಯಿತು,
ನಟಿ ರಮ್ಯ ಯಡಿಯೂರಪ್ಪನವರ ಸಂದರ್ಶನ ಮಾಡಿತ್ತಿದ್ದುದ್ದು. ಚಾನೆಲ್ ಸರ್ಫ್
ಮಾಡುತ್ತಿದ್ದ ಸಣ್ಣ ಹುಡುಗ ರಮ್ಯಳ ಮುಖ ನೋಡುತ್ತಿದ್ದ ಹಾಗೆ ನಿಲ್ಲಿಸಿದ,
ಪರವಾಗಿಲ್ವೆ ನಮ್ಮ ಮುಖ್ಯಮಂತ್ರಿಗಳು ಹೀರೋಯಿನ್ ರಿಗೆಲ್ಲಾ ಸಂದರ್ಶನ ಕೊಡುವ ಧೈರ್ಯ
ಮಾಡಿದ್ದಾರೆಂದು ನಾನೂ ಕಿವಿಗೊಟ್ಟೆ, ಆಕೆಯ ಪ್ರಶ್ನೆಗಳನ್ನು ಕೇಳುತ್ತಿದ್ದ ಹಾಗೇ
ನನಗೆ ಮೈ ಉರಿದು ಹೋಯಿತು, ನೀವೇಕೆ ವೈಟ್ ಸಫಾರಿ ಹಾಕುತ್ತೀರಿ? ನೀವು ಮ್ಯಾನಿಕ್ಯೂರ್
ಪೆಡಿಕ್ಯೂರ್ ಮಾಡಿಸುತ್ತೀರ? ಬ್ಯೂಟಿ ಪಾರ್ಲರಿಗೆ ಹೋಗುತ್ತೀರ? ಅರೆ ರಾಜ್ಯದ ಮುಖ್ಯ
ಮಂತ್ರಿಗಳಿಗೆ ಕೇಳುವ ಪ್ರಶ್ನೆಯಾ ಇದು?! ಇರಲಿ ಅದರ ಬಗ್ಗೆ ಮುಂದೆ ಬರೆಯುವೆ.
ಅಲ್ಲಿನ ವಾತಾವರಣ ಅನುಭವಿಸಿ ಖುಷಿ ಪಡಲು ಇನ್ನೊಂದು ಅವಕಾಶವೆಂಬಂತೆ ಪಕ್ಕದ ಹಳ್ಳಿಗೆ
ಹೋಗಬೇಕಿದ್ದ ಬಸ್ ಆ ದಿನ ನಾಪತ್ತೆಯಾಗಿತ್ತು, ಮೂರು ಕಿ.ಮೀ ನಷ್ಟು ದೂರವಿದ್ದ ಊರಿಗೇ
ನಡೆದೇ ಹೊರಟೆವು. ನನ್ನ ಜೊತೆಯಲ್ಲಿ ಬರುತ್ತಿದ್ದ ಗೆಳೆಯರೊಬ್ಬರೊಡನೆ ಹಳ್ಳಿಯ ಆಗು
ಹೋಗುಗಳ ಬಗ್ಗೆ, ಪಟ್ಟಣದ ಯಾಂತ್ರಿಕತೆಯ ಬಗ್ಗೆ ಲೋಕಾಭಿರಾಮವಾಗಿ ಮಾತು ಸಾಗಿತ್ತು.
ಮಾತು ಒಳ್ಳೆಯ ಬಿರುಸು ಪಡೆದು ನಾನು ಹಳ್ಳಿಯ ಜನರೆಲ್ಲ ನೆಮ್ಮದಿ ಉಳ್ಳವರೆಂದು
ಪಟ್ಟಣದವರ ಚೆನ್ನಾಗಿರುವಿಕೆ ಬರಿಯ ತೋರಿಕೆಯೆಂದೂ ಹೇಳಿದೆ. ಆದರೆ ಆ ಹಳ್ಳಿಯ ಜನರ ಇತರ
ಸ್ವಭಾವಗಳ ಬಗ್ಗೆ (ಅವರು ಸ್ವತಃ ಅದೇ ಊರಿನವರಾದ್ದರಿಂದ) ಹೇಳುತ್ತಾ, ಹೇಗೆ ರೈತನ
ಶ್ರಮವು ಸರಿಯಾದ ಅನುಕೂಲಗಳಿಲ್ಲದೆ ಇರುವುದರಿಂದ ಫಲ ದೊರೆಯದೇ ಪೋಲಾಗುತ್ತಿದೆ,
ಅನಕ್ಷರಸ್ಥ ಹಳ್ಳಿಗರು ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳದೆ ಅವುಗಳಿಗೆ
ವಿಮುಖರಾಗುತ್ತಾರೆ, ಸಮಯ ಬಂದಾಗ ಒಗ್ಗಟ್ಟಾಗಿರಲು ಒದ್ದಾಡುತ್ತಾರೆ, ಕಷ್ಟವಿಲ್ಲದ
ಪಟ್ಟಣದ ಜೀವನಕ್ಕೆ ಹಾತೊರೆಯುತ್ತಾರೆ, ಸರ್ಕಾರವು ರೈತನಿಗೆ ಕೊಟ್ಟಿರುವ
ಸೌಲಭ್ಯಗಳನ್ನು ಬಳಸಿಕೊಳ್ಳುವಲ್ಲಿ ಎಡವುತ್ತಾರೆ, ಸರ್ಕಾರವು ಒದಗಿಸಿರುವ
ಸೌಲಭ್ಯಗಳಲ್ಲಿ ರೈತನಿಗೆ ಆಗುತ್ತಿರುವ ಅನುಕೂಲವೆಷ್ಟು ಎಂದೆಲ್ಲ ವಿವರಿಸಿ ಒಂದು
ಉದಾಹರಣೆಯನ್ನು ಕೊಟ್ಟರು.
ಅದನ್ನು ವಿವರಿಸುವ ಮೊದಲು ಕಬ್ಬಿನ ಬಗ್ಗೆ ಸ್ವಲ್ಪ ವಿವರಣೆ ಅಗತ್ಯ. ಕಬ್ಬು ಒಂದು
ದೀರ್ಘ ಕಾಲದ ಬೆಳೆ, ಕಬ್ಬನ್ನು ಸಸಿಯಿಂದ ಕಟಾವಿನ ಹಂತದವರೆಗು ಬೆಳೆಯಲು ಕನಿಷ್ಟ
ಹನ್ನೊಂದು ತಿಂಗಳು ಬೇಕಾಗುತ್ತದೆ. ಕಬ್ಬು ಬೆಳೆಗಾರರಿಗೆ ಸರ್ಕಾರದಿಂದ ಸಾಲ
ದೊರೆಯುತ್ತದೆ. ಸರ್ಕಾರ, ರೈತನು ಬೆಳೆದ ಕಬ್ಬನ್ನು ತನ್ನದೇ ಅಧೀನದಲ್ಲಿರುವ
ಕಾರ್ಖಾನೆಗೆ ಕೊಡುವಂತೆ ಒಪ್ಪಂದ ಮಾಡಿಕೊಂಡು ಕಡಿಮೆ ಬಡ್ಡಿ ದರದಲ್ಲಿ ಸಾಲ
ಕೊಡುತ್ತದೆ. ನಿಗಧಿತ ಸಮಯದಲ್ಲಿ ಕಬ್ಬನ್ನು ಕಾರ್ಖಾನೆಗೆ ಒದಗಿಸದ ಪಕ್ಷದಲ್ಲಿ,
ಸಾಲವನ್ನು ಬಡ್ಡಿ ಮತ್ತು ಇತರೆ ದಂಡಗಳ ಸಮೇತ ಹಿಂತಿರುಗಿಬೇಕಾಗುತ್ತದೆ. ಇತ್ತ
ಸರ್ಕಾರದ ಅಧೀನದಲ್ಲಿರುವ ಕಾರ್ಖಾನೆಯ ಫೀಲ್ಡ್ ಮ್ಯಾನ್ ನಿಂದ ರೈತನ ಜಮೀನನ್ನು
ಪರಿಶೀಲಿಸಿ ಆ ಜಾಗದಲ್ಲಿ ಬೆಳೆಯಬಹುದಾದ ಕಬ್ಬನ್ನು ಅಂದಾಜಿಸಿ, ಕಟಾವಿನ ಸಮಯದಲ್ಲಿ
ಅಂದಾಜಿಸದಷ್ಟೇ ಕಬ್ಬು ಜಮೀನಿನಲ್ಲಿ ದೊರೆಯಬೇಕೆಂದು ಒಪ್ಪಂದದಲ್ಲಿ ಹೇಳಿರುತ್ತಾರೆ.
ಇದು ಸಾಲ ನೀಡಿ ರೈತನಿಂದ ಮರುಪಾವತಿ ಪಡೆಯುವುದಕ್ಕೆ ಸರ್ಕಾರ ಮಾಡಿರುವ ನಿಯಮ. ಆದರೆ
ಇಲ್ಲಾಗುವ ವ್ಯತಿರಿಕ್ತ ಪರಿಣಾಮಗಳೆಂದರೆ ಕಾರ್ಖಾನೆಯು ಒಂದೊಮ್ಮೆ ಫೀಲ್ಡ್ ಮ್ಯಾನ್
ನನ್ನು ಕಳಿಸಿ ಬೆಳೆಯನ್ನು ಅಂದಾಜಿಸಿದ ಮೇಲೂ ಕೆಲವೊಮ್ಮೆ ಸರಿಯಾದ ಸಮಯದಲ್ಲಿ ಕಟಾವು
ಮಾಡಿಸುವಲ್ಲಿ ತಡಮಾಡುತ್ತದೆ. (ಇದಕ್ಕೆ ಬೇರೆ ಬೇರೆಯದೇ ಕಾರಣಗಳಿರುತ್ತವೆ,
ಕಾರ್ಖಾನೆಯೂ ಅದಾಗಲೇ ಬೇರೆ ಕಡೆಯಿಂದ ಕಡಿಮೆ ಬೆಲೆಯ ಕಬ್ಬು ತರಿಸಿದ್ದರೆ,
ಕಾರ್ಖಾನೆಯಲ್ಲಿ ಕಡಿಮೆ ಕಬ್ಬನ್ನು ಅರೆಯುವ ಅವಕಾಶವಿದ್ದು ಜಾಸ್ತಿ ಜಮೀನಿಗೆ ಒಪ್ಪಂದ
ಮಾಡಿಕೊಂಡಿದ್ದರೆ, ಮಳೆ ಸರಿಯಾಗಿ ಆಗದೇ ಬೆಳೆಯೇ ತಡವಾಗಿದ್ದರೆ, ಇತ್ಯಾದಿ) ಆಗ ತಪ್ಪು
ಸರ್ಕಾರದ ಅಧೀನದಲ್ಲಿರುವ ಕಾರ್ಖಾನೆಯದ್ದೇ ಆದರೂ ರೈತ ತಾನು ಪಡೆದಿರುವ ಸಾಲಕ್ಕೆ
ಬಡ್ಡಿ ಕಟ್ಟಲೇ ಬೇಕು. ಸರ್ಕಾರದ್ದೇ ಅಧೀನದಲ್ಲಿರುವ ಎರೆಡು ವಿಭಾಗಗಳು ಒಂದಕ್ಕೊಂದು
ಪೂರಕವಲ್ಲದೆ ರೈತನಿಗೆ ಅನಾನುಕೂಲಕರವಾಗಿದೆ ಎಂಬುದು ಒಂದು ಅಂಶವಾದರೆ, ಒಂದೊಮ್ಮೆ
ಕಬ್ಬಿನ ಬೆಲೆಯಲ್ಲಿ ಏರಿಕೆ ಇದ್ದರೆ ಕೆಲವು ರೈತರು ಖಾಸಗೀ ಕಾರ್ಖಾನೆಯವರಿಗೆ
(ಬಂಡವಾಳಶಾಹಿಗಳಾದ ಖಾಸಗೀ ಕಾರ್ಖಾನೆಯವರು ತಮ್ಮ ಉತ್ಪನ್ನಗಳನ್ನು ಹೆಚ್ಚಿನ
ಪ್ರಮಾಣದಲ್ಲಿ ದಾಸ್ತಾನು ಮಾಡಿಕೊಂಡಿದ್ದು, ಮಾರುಕಟ್ಟೆಯಲ್ಲಿ ಬೇಡಿಕೆ ಸೃಷ್ಟಿಸಿ
ಹೆಚ್ಚಿನ ಬೆಲೆಗೆ ಮಾರುತ್ತಾರೆ) ತಮ್ಮ ಬೆಳೆಯನ್ನು ಹೆಚ್ಚಿನ ಬೆಲೆಗೆ ಮುಂಚೆಯೇ
ಮಾರಿಕೊಂಡು ಕಾರ್ಖಾನೆಯವರು ಬಂದಾಗ ಬೆಳೆಯಿಲ್ಲದ ಜಮೀನನ್ನು ತೋರಿಸುತ್ತಾರೆ.
ಕಾರ್ಖಾನೆಯಲ್ಲಾಗ ಕಬ್ಬಿನ ಪೂರೈಕೆ ಇಲ್ಲದೆ ಅರೆಯುವ ಮಶೀನುಗಳು ಬಳಕೆಯಾಗದೆ ಸರ್ಕಾರವು
ಅದರಲ್ಲಿ ತೊಡಗಿಸಿದ ಹಣ ಪೋಲಾಗುತ್ತದೆ. ಕಬ್ಬಿನ ಬೆಲೆಯ ಹೆಚ್ಚಳಕ್ಕೆ, ಸಾಲ ಮನ್ನಾ
ಮಾಡಲಿಕ್ಕೆ ಮುಷ್ಕರಗಳು ಹೂಡಲಾಗುತ್ತದೆಯಾದರೂ ನಿಜವಾಗಿಯೂ ತೊಡಕಾಗಿರುವ ಈ
ಕಾರಣಗಳನ್ನು ಅರ್ಥಮಾಡಿಕೊಳ್ಳುವಲ್ಲಿ ಸರ್ಕಾರ ಮತ್ತು ಇತರ ಹೋರಾಟಗಾರರೆನಿಸಿಕೊಂಡವರು
ಸೋಲುತ್ತಾರೆ.
ಇದು ಗಮನಕ್ಕೆ ಬಂದ ಉದಾಹರಣೆಯಾಗಿದ್ದು ವ್ಯವಸಾಯ ಮಾಡುವಾಗ ಇಂತಹ ಹಲವು ಹತ್ತು
ಸಮಸ್ಯೆಗಳನ್ನು ರೈತನು ಎದುರಿಸಬೇಕಾಗುತ್ತದೆ. ರೈತನ ಜೀವನ ನಾನಂದುಕೊಂಡಷ್ಟು ಸುಲಭವೂ,
ಸಲೀಸೂ ಅಲ್ಲ ಎಂಬುದರ ಅರಿವಾಯಿತು. ಇವೆಲ್ಲದರ ಅರಿವು ಎಷ್ಟು ಜನಕ್ಕೆ ಇರುತ್ತದೆ?
ಅರಿವು ಮೂಡಿದ ಮೇಲಾದರೂ ಯುವಜನಾಂಗವೆನಿಸಿಕೊಂಡ ನಾವು ಮಾಡಬೇಕಾದದ್ದೇನು? ಇಂದಿನ ಯುವ
ಪೀಳಿಗೆ ವ್ಯವಸಾಯದಲ್ಲಿ ತೊಡಗುತ್ತಿಲ್ಲ ಎಂದು ದೂರುವ ಹಿರಿಯರಿಗೆ, ಇಲ್ಲಿನ
ಅನಾನುಕೂಲಗಳ ಅರಿವಿಲ್ಲವೇ? ಹಾಯಾದ ಪಟ್ಟಣದ ಜೀವನ ನೌಕರಿ ಎಲ್ಲವನ್ನು ಬಿಟ್ಟು
ವ್ಯವಸಾಯ ಮಾಡಲು ಯುವಕರಾದರೂ ಏಕೆ ಮುಂದೆ ಬಂದಾರು? ಮುಂದೆ ಬರುವಂತೆ ನಮ್ಮ ಸರ್ಕಾರ
ಏನು ಕ್ರಮ ತೆಗೆದುಕೊಂಡಿದೆ? ನಮ್ಮ ಶಿಕ್ಷಣ ಪದ್ದತಿಯು ರೈತರ ಸಮಸ್ಯೆಗಳು
ಯುವಜನಾಂಗಕ್ಕೆ ಎಷ್ಟರ ಮಟ್ಟಿಗೆ ಮುಟ್ಟಿಸುತ್ತಿದೆ? ನಗರದ ಜನತೆಗೆ ಹೀಗೆ
ಹಳ್ಳಿಗಳಲ್ಲಿ ರೈತರು ಅನುಭವಿಸುತ್ತಿರುವ ಬವಣೆ ತಿಳಿದಿದೆಯೇ? ನಮ್ಮಲ್ಲಿಲ್ಲಿ ದೇಶದ
ತುಂಬಾ ಸಮಸ್ಯೆಗಳಿವೆ, ಸ್ವಾತಂತ್ರ್ಯದದಿನ, ನಟಿಯೊಬ್ಬಳು ಮುಖ್ಯಮಂತ್ರಿಯನ್ನು
ಕೇಳುತ್ತಾಳೆ ’ನೀವೇಕೆ ವೈಟ್ ಸಫಾರಿ ಹಾಕುತ್ತೀರಿ? ನೀವು ಮ್ಯಾನಿಕ್ಯೂರ್ ಪೆಡಿಕ್ಯೂರ್
ಮಾಡಿಸುತ್ತೀರ? ಬ್ಯೂಟಿ ಪಾರ್ಲರಿಗೆ ಹೋಗುತ್ತೀರ?’ ನಗುವುದೋ ಅಳುವುದೋ ನೀವೆ ಹೇಳಿ?!
(ಮುಗಿಸುವ ಮುನ್ನ: ಇದನ್ನೆಲ್ಲ ತಿಳಿದುಕೊಂಡು ಹೀಗೆ ಬರೆಯುತ್ತಿರುವುದರಿಂದ ನನ್ನ
ದೇಶಕ್ಕೆ ಅದರ ಸಮಸ್ಯೆಗಳ ನಿವಾರಣೆಗೆ ನಾನು ಉಪಕಾರ ಮಾಡುತ್ತಿದ್ದೇನೆ ಎಂದು
ನನಗನಿಸುತ್ತಿಲ್ಲ. ನಗರದ ನೌಕರಿಯಲ್ಲಿ ಆರಾಮವಾಗಿ ಕಾಲ ಕಳೆಯುತ್ತಿರುವ ನಾನು ಹಳ್ಳಿಗೆ
ಹೋಗಿ ಎಂದಾದರು ಮೈ ಬಗ್ಗಿಸಿ ದುಡಿಯಬಲ್ಲೆನೇ? ಬಡಕಲು ದನಗಳಿಗೆ ನೇಗಿಲನ್ನು ಕಟ್ಟಿ
ವ್ಯವಸಾಯ ಮಾಡುತ್ತಿರುವ ರೈತನಿಗೆ ನಗರದಲ್ಲಿ ನಮಗೆ ಸಿಗುವ ಸಾರ್ವಜನಿಕ ಸೌಲಭ್ಯಗಳ ಶೇ
೫ ರಷ್ಟೂ ಸಿಗುತ್ತಿಲ್ಲ. ಓದಿರುವ ನಾವು ಸರ್ಕಾರಿ ನೌಕರಿಗಳಲ್ಲಿನ ಮೀಸಲಾತಿ,
ಕನ್ನಡಪರಚಳವಳಿಗಳಲ್ಲಿ ತುಸು ಹೆಚ್ಚೇ ಎನಿಸುವಷ್ಟು ಹೋರಾಡುತ್ತೀವಾದರೂ, ರೈತನ ಕಷ್ಟಗಳ
ಬಗ್ಗೆ ಎಂದಾದರೂ ಯೋಚಿಸಿದ್ದೇವೆಯೇ? ನಿಜವಾಗಿಯೂ ಅತಿ ಹೆಚ್ಚಿನ ಪ್ರಾಮುಖ್ಯತೆ,
ಸೌಲಭ್ಯಗಳು ಸಿಗಬೇಕಾಗಿರುವುದು ನಮ್ಮ ದೇಶದ ಬೆನ್ನೆಲುಬಾದ ರೈತನಿಗಲ್ಲವೇ?)
ವಾರಾಂತ್ಯದ ಕವಿತೆ: ಈರುಳ್ಳಿ
Posted on: July 31, 2009
- ರಂಜಿತ್ ಅಡಿಗ, ಕುಂದಾಪುರ.
ಒಮ್ಮೆಯಾದರೂ ಈ ಸಂಬಂಧಗಳಾಳಕ್ಕೆ
ಇಣುಕಲೇ ಬೇಕು
ಅದು ಈರುಳ್ಳಿ ಸಿಪ್ಪೆ ಸುಲಿದಂತೆ
ಮೊನ್ನೆಮೊನ್ನೆಯವರೆಗೂ ತನ್ನ
ಜೀವಕ್ಕಿಂತ ಹೆಚ್ಚು ಪ್ರೀತಿಸ್ತೀನಿ ಅಂತ
ಒದ್ದೆ ಕಣ್ಣಾಲಿಗಳಿಂದ ಹೇಳಿದ ಗೆಳತಿ
ಕಮ್ಮಿ ಮಾರ್ಕ್ಸು ಬಂದರೆ
ಮನೆಯಿಂದ ಓಡಿಸ್ತೀನಿ ಎಂದು
ಸಿಕ್ಕಾಪಟ್ಟೆ ಬೈದ ಅಪ್ಪ
ಕ್ಯಾಂಪಸ್ಸಿನಲ್ಲಿ ಕೆಲಸ
ಸಿಗಲಿಲ್ಲವೆಂದೊಮ್ಮೆ ಸುಮ್ಮನೆ
ಪರೀಕ್ಷೆ ಮಾಡಲು ಹೇಳಿದ ಕೂಡಲೇ
ಕೆಲಸ ಸಿಗದವನನ್ನು ಮದ್ವೆಯಾಗ್ತೀನಂತ
ಹ್ಯಾಗೆ ತನ್ನಪ್ಪನನ್ನು ಒಪ್ಪಿಸಬೇಕು
ನೀ ನನ್ನ ಮರೆಯಲೇಬೇಕು
ಎಂದು ತನ್ನ ಜೀವವನ್ನೇ ಕಡೆಗಣಿಸಿದಳಾಕೆ
ಮನೆಯನ್ನು ಒತ್ತೆಯಿಡೋಣ
ರಿಟಾಯರ್ಮೆಂಟ್ ಹಣವೂ ಬರಬಹುದು
ಸ್ವಂತ ಬಿಸಿನೆಸ್ಸು ಆರಂಭಿಸು ಮಗನೇ ಅನ್ನುವನು ಅಪ್ಪ
ಎರಡೂ ಮಾತಿಗೂ ಉಕ್ಕಿದ್ದು
ಕಣ್ಣೆದುರಿಗಿನ
ಪರದೆ ಜಾರಿಸೋ ಕಣ್ಣಿರೇ.
ಶಾಂತಿ ಮಂತ್ರ!
Posted on: July 23, 2009
ನಾನು ನನ್ನ ಸಂಸಾರ!
Posted on: July 20, 2009
- In: ಹಾಸ್ಯ
- 6 Comments
ವಾರಾಂತ್ಯದ ಕವಿತೆ: ಬಲೂನು!
Posted on: July 18, 2009
-ರಂಜಿತ್ ಅಡಿಗ , ಕುಂದಾಪುರ.
ಮೂರು ಕಾಸಿತ್ತು ಕೊಂಡ ವಸ್ತು
ಎಲ್ಲೆಂದರೆ ಅಲ್ಲೇ ಬಿದ್ದುಕೊಂಡಿತ್ತು
ಎರಡು ಹನಿ ಉಸಿರು ತುಂಬಿದರೆ
ತನ್ನೊಳಗನು ಅರಿಯಿತು, ಎಚ್ಚೆತ್ತಿತು ಆತ್ಮ

ಉಸಿರಿಗೆಲ್ಲ ಬೆಲೆಯಿಲ್ಲ ಎಂದು ನೊಂದು
ಸಾಯಿಸಿಕೊಳ್ಳುವವರನು ನಾಚಿಸುತ್ತ
ಸ್ವತಃ ಬೆಲೆಯ ಮಟ್ಟವನು ಸೂಚಿಸುತ್ತ
ಎತ್ತರೆತ್ತರ ಏರುತಿತ್ತು,ಆಗಸವನೇ ತಲುಪುವತ್ತ
ಯಮನ ಜೋಳಿಗೆಯಂತೆ ಗರ್ಭದೊಳು
ಮುದುಡಿದ ಮಗುವಿನಂತೆ
ತೇಲುತ್ತ ಹಾರುತ್ತ ಆಗುತ್ತ ಚುಕ್ಕಿ
ಸುತ್ತಲಿನ ಜನರೆಲ್ಲ ನೋಡಿ
ಉಸಿರು ಹೋಯಿತು, ಉಸಿರು ಹೋಯಿತು
ಎಂದೆಸೆದರು ಉದ್ಗಾರವನು!
****
ನನ್ನ ಅರ್ಜಿಗೆ ಇನ್ನೂ ಉತ್ತರ ಬಂದಿಲ್ಲ!
Posted on: July 15, 2009
- In: ಮೇರಿ ಮರ್ಜಿ
- 3 Comments
- ರೇಶ್ಮಾ ನಾರಾಯಣ, ಉಡುಪಿ
ಅವನು ನಮ್ಮ ಪುಟ್ಟ ಜಗತ್ತಿಗೆ ಅದ್ಭುತ ಹೀರೋ ಆಗಿದ್ದ
ನಾನು ಪ್ರೈಮರಿಯಲ್ಲಿದಾಗ ಟಿ.ವಿ ಯಲ್ಲಿ ಶಕ್ತಿಮಾನ್ ಅಂತ ಒಂದು ಧಾರಾವಾಹಿ ಬರ್ತಿತ್ತು. ನನ್ನ ಥರಾನೇ ಎಲ್ಲ ಮಕ್ಕಳೂ ಇಷ್ಟ ಪಡ್ತಿದ್ದ ಧಾರಾವಾಹಿ ಅದು. ಪ್ರತಿ ಆದಿತ್ಯವಾರ ಮಧ್ಯಾನ್ ೧೨ ಗಂಟೆಗೆ ಬರ್ತಿದ್ದ ಧಾರಾವಾಹಿ ನೋಡ್ಕೊಂಡು ಹೋಗಿ, ಸೋಮವಾರ ಬೆಳಿಗ್ಗೆ study periodನಲ್ಲಿ ಫ್ರೆಂಡ್ಸ್ ಜೊತೆ ಅದರ ಬಗ್ಗೆ ಪಾಠಕ್ಕಿಂತ ಸೀರಿಯಸ್ ಆಗಿ ಚರ್ಚೆ ಮಾಡ್ತಿದ್ವಿ. ಆಕಸ್ಮಾತ್ ಧಾರಾವಾಹಿ ಬರೋ ಟೈಮಲ್ಲಿ ಕರೆಂಟ್ ಇಲ್ಲದಿದ್ರೆ ಮಾತ್ರ ಕೆ. ಇ ಬಿ ಯವರಿಗೆ ಮನಸಾರೆ ಶಾಪ ಹಾಕುತ್ತಿದ್ವಿ. ಕರೆಂಟ್ ಇದ್ದ ಒಂದು ದಿನಾನೂ ’ಶಕ್ತಿಮಾನ್’ ನ ಮಿಸ್ ಮಾಡ್ಕೊಂಡಿರಲಿಲ್ಲ. ಶನಿವಾರನೇ ಹೋಂವರ್ಕ್ ಮುಗಿಸಿ ಕುಳಿತಿರುತ್ತಿದ್ವಿ.
ಆ ಒಂದು ಗಂಟೆಯ ಅವಧಿ ನಮ್ಮ ಪಾಲಿಗೆ ಅತೀ ಪ್ರಿಯವಾಗಿರ್ತಿತ್ತು. ಆ ಟೈಂ ನಲ್ಲಿ ಊಟಕ್ಕೆ
ಕರೆದರೂ ನಾವು ಕೇಳಿಸದಂತೆ ಕೂತಿರ್ತಿದ್ವಿ. ಶಕ್ತಿಮಾನ್ ಪಾತ್ರಧಾರಿ ಮುಖೇಶ್ ಖನ್ನಾ ಹಾಕಿಕೊಳ್ತಿದ್ದ ಆ ಕೆಂಪು ಜಾಕೆಟ್, ಅದರ ನಡುವಿನ ಗೋಲ್ಡ್ ಕಲರ್ ಸ್ಟಾರ್ ಎಲ್ಲಾ ಈಗಲೂ ಕಣ್ಣಿಗೆ ಕಟ್ಟಿದಂತಿದೆ. ಶಕ್ತಿಮಾನ್ ಟ್ಯಾಟ್ಟೂ ಗಳನ್ನಂತೂ ರಾಶಿ ರಾಶಿ ಒಟ್ಟು ಮಾಡಿ ಪುಸ್ತಕ, ಕಂಪಾಸ್ ನ ಮೇಲೆಲ್ಲಾ ಅಂಟಿಸುತ್ತಿದ್ವಿ. ದ್ವಿಜ್ ಎಂಬ ಬಾಲಕನ ಕೈಯಲ್ಲಿನ ಆ ಟೈಮ್ ಮಶೀನ್ ಕನಸಲ್ಲೂ ನಮ್ಮನ್ನು ಕಾಡುತ್ತಿತ್ತು. ಅವನು ಅಲ್ಲಿ ರಾಕ್ಷಸರ ಜೊತೆ ಹೋರಾಡುತ್ತಿದ್ದರೆ ನಾವು ಇಲ್ಲಿ ಕುಳಿತು ನಾವೇ ಹೊಡೆದಾಡ್ತಿದ್ದೀವಿ ಅನ್ನೋ ಥರ ಆಡ್ತಿದ್ವಿ.
ಶಕ್ತಿಮಾನ್ ನ ’ಪಂಡಿತ್ ಗಂಗಾಧರ್ ವಿದ್ಯಾಧರ್ ಮಾಯಾಧರ್ ಓಂಕಾರನಾಥ್ ಶಾಸ್ತ್ರಿ’ ಅನ್ನೋ ಡೈಲಾಗ್ ಅಂತೂ ಫೇವರೀಟ್ ಆಗಿತ್ತು. ಅದರಲ್ಲಿನ ಗಿಲ್ ವಿಶ್ ಅನ್ನೋ ರಾಕ್ಷಸ ಕೈ ಬೆರಳುಗಳನ್ನು ತಿರುಗಿಸೋ ರೀತಿ ಭಯಾನಕವಾಗಿರ್ತಿತ್ತು. ಮಾತಾಡಿದ್ದಕ್ಕೆ ಹೆಸರು ಬರೆದು ಟೀಚರ್ ಗೆ ಕೊಟ್ಟ ನಮ್ಮ ಕ್ಲಾಸ್ ನ ಒಬ್ಬ ಹುಡುಗನಿಗೆ ’ಗಿಲ್ ವಿಶ್’ ಅಂತ ಹೆಸರಿಟ್ಟು ಬೇಕಾದಷ್ಟು ಬೈದು ಸಿಟ್ಟು ತೀರಿಸ್ಕೋತಿದ್ವಿ. ರಜೆಯಲ್ಲಿ ಶಕ್ತಿಮಾನ್ ಆಟ ಆಡೋವಾಗ ’ನಾನಾಗ್ತೀನಿ.. ತಾನಾಗ್ತೀನಿ’ ಅಂತ ಗಲಾಟೆ ಮಾಡಿ ಕೊನೆಗೆ ಆಟ ಜಗಳದಲ್ಲಿ ಮುಗಿದಿರ್ತಿತ್ತು. ಅದರ ಕ್ರೇಜ್ ಎಷ್ಟಿತ್ತು ಅಂದರೆ ಅದು ಮುಗಿದಾಗ, ’ಪುನಃ ಮೊದಲಿನಿಂದನಾದ್ರೂ ತೋರಿಸ್ಬೇಕಿತ್ತು’ ಅಂದುಕೊಂಡಿದ್ವಿ. ಶಕ್ತಿಮಾನ್ ಥರಾನೇ ಮಹಡಿ ಮೇಲಿಂದ ಹಾರೋಕೆ ಹೋಗಿ ಒಬ್ಬ ಹುಡುಗ ಬಿದ್ದು ಪ್ರಾಣ ಕಳೆದುಕೊಂಡ ಅಂತ ಗೊತ್ತಾದಾಗ ತುಂಬಾ ಬೇಜಾರಾಗಿತ್ತು. ಶಕ್ತಿಮಾನ್ ನ ಹಾಗೇ ನಂಗೂ ಅದ್ಭುತವಾದ ಶಕ್ತಿ ಕೊಡು ಅಂತ ದೇವರಿಗೆ ಹಾಕಿದ ಅರ್ಜಿಗೆ ಅವನ ಕಡೆಯಿಂದ ಇನ್ನೂ ಉತ್ತರ ಬಂದಿಲ್ಲ.
- ಸುಪ್ರೀತ್ ಕೆ. ಎಸ್, ಬೆಂಗಳೂರು.
ಪ್ರತಿನಿತ್ಯ ತಪ್ಪದೆ ಬ್ಲಾಗಿಗೆ ಬರೆಯಬೇಕು ಅಂದುಕೊಂಡಿದ್ದೆ. ಅದನ್ನೊಂದು ಸಾಧನೆ ಎನ್ನುವ ಹಾಗೆ ಭಾವಿಸಿದ್ದೆ. ಏಕೆ ದಿನನಿತ್ಯ ಬರೆಯಬೇಕು ಎಂದು ಕೇಳಿಕೊಳ್ಳುವ ತಾಳ್ಮೆ ಇರುತ್ತಿರಲಿಲ್ಲ. ಏನೋ ಉನ್ಮಾದ. ಬರೀ ಬೇಕು ಅನ್ನಿಸಿದ ತಕ್ಷಣ ಬರೆಯಲು ಶುರುಮಾಡಿಬಿಡಬೇಕು. ಏನಾದರೂ ಮಾಡಬೇಕೆಂಬ ಹುಮ್ಮಸ್ಸು ಹುಟ್ಟಿದಾಗ ದೊಡ್ಡವರು ಅದರ ಇಹಪರಗಳ ಬಗ್ಗೆ ಯೋಚಿಸಿ ಮಾಡು ಎಂದಾಗ ಹುಟ್ಟುವ ರೇಜಿಗೆಯನ್ನೇ ನಮ್ಮನ್ನು ನಾವು ನಿಧಾನಿಸಲು ಪ್ರಯತ್ನಿಸಿದಾಗ ಎದುರಿಸಬೇಕಾಗುತ್ತದೆ. ಈ ಹದಿ ವಯಸ್ಸಿನಲ್ಲಿ ಯಾವಾಗಲೂ ವಿವೇಕಕ್ಕಿಂತ ಸಂಕಲ್ಪಶಕ್ತಿ, ಕ್ರಿಯಾಶೀಲತೆಯೇ ಹೆಚ್ಚಾಗಿರುತ್ತದೆಯೇನೋ! ಹಾಗಾಗಿ ನಾನು ಉಕ್ಕುವ ಉತ್ಸಾಹಕ್ಕೆ ಬ್ರೇಕ್ ಹಾಕುವ ಯಾವ ಪ್ರಯತ್ನವನ್ನೂ ಮಾಡುವುದಿಲ್ಲ. ಆದರೆ ಆ ಕೆಲಸವನ್ನು ನನ್ನ ಸೋಮಾರಿತನ, ಅಶಿಸ್ತುಗಳು ನಿರ್ವಹಿಸುವುದರಿಂದ ನನಗೆ ಹೆಚ್ಚಿನ ಹಾನಿಯೇನೂ ಆಗಿಲ್ಲ!
ಪ್ರತಿದಿನ ಬ್ಲಾಗು ಬರೆಯಬೇಕು ಎಂಬುದರ ಹಿಂದೆ ಕೇವಲ ಬರಹದ ಪ್ರಮಾಣದ ಮೇಲಿನ ಮೋಹ ಕೆಲಸ ಮಾಡುತ್ತಿತ್ತು. ನನ್ನನ್ನು ಪ್ರಭಾವಿಸಿದ ಪತ್ರಕರ್ತನ ಹಾಗೆ ದಿನಕ್ಕಷ್ಟು ಪುಟ ಬರೆಯಬೇಕು, ವಾರಕ್ಕೆ ಇಷ್ಟು ಓದಬೇಕು ಎಂಬ ಅನುಕರಣೆಯ ಗುರಿಗಳನ್ನು ನನ್ನೆದುರು ಇರಿಸಿಕೊಂಡಿದ್ದೆ. ನನ್ನದಲ್ಲದ ಗುರಿಯೆಡೆಗೆ ಓಡುವ ಧಾವಂತ ಪಡುತ್ತಿದ್ದೆ. ನನ್ನದಲ್ಲದ ಹಸಿವಿಗೆ ಊಟ ಮಾಡುವ, ನನ್ನದಲ್ಲದ ಹೊಟ್ಟೆನೋವಿಗೆ ಔಷಧಿ ಕುಡಿಯುವ ಹುಂಬತನದ ಅರಿವೇ ಆಗಿರಲಿಲ್ಲ. ಒಬ್ಬ ಕವಿಯನ್ನೋ, ಲೇಖಕನನ್ನೋ, ಕಥೆಗಾರನನ್ನೋ, ಸಿನೆಮಾ ನಿರ್ದೇಶಕನನ್ನೋ, ಹೀರೋವನ್ನೋ ಪ್ರಾಣ ಹೋಗುವಷ್ಟು ಗಾಢವಾಗಿ ಪ್ರೀತಿಸುವುದು, ಆರಾಧಿಸುವುದು, ಅನುಕರಣೆಯಲ್ಲಿ ಸಾರ್ಥಕ್ಯವನ್ನು ಕಂಡುಕೊಳ್ಳುವುದು, ಅನಂತರ ಸ್ವಂತಿಕೆ ಕಳೆದುಕೊಂಡ ಅಭದ್ರತೆ ಕಾಡಿದಾಗ ಆ ಪ್ರೇರಣೆಯ ಮೂಲವನ್ನೇ ದ್ವೇಷಿಸಲು ತೊಡಗುವುದು ಇದೆಲ್ಲಾ ಯಾಕೆ ಬೇಕು? ಆದರೆ ಈ ಅರಿವು ಒಂದು ಅಚ್ಚಿನಲ್ಲಿ ಮೌಲ್ಡ್ ಆಗುವಾಗಿನ ಸುಖವನ್ನು, ಐಶಾರಾಮವನ್ನು ಅನುಭವಿಸುವಾಗ ಉಂಟಾಗುವುದಿಲ್ಲ. ಅದೇ ತಮಾಷೆಯ ಹಾಗೂ ದುರಂತದ ಸಂಗತಿ.
ವಿಪರೀತ ಬರೆಯಬೇಕು ಅನ್ನಿಸುವುದು ಸಹ ತುಂಬಾ ಮಾತಾಡಬೇಕು ಅನ್ನಿಸುವುದುರ ತದ್ರೂಪು ಭಾವವಾ? ಮಾತು ಹೇಗೆ ಚಟವಾಗಿ ಅಂತಃಸತ್ವವನ್ನು ಕಳೆದುಕೊಂಡು ಕೇವಲ ಶಬ್ಧವಾಗಿಬಿಡಬಲ್ಲುದೋ ಹಾಗೆಯೇ ಬರವಣಿಗೆಯು ಬರಡಾಗಬಲ್ಲದಾ? ವಿಪರೀತ ಬರೆಯಬೇಕು ಎಂದು ತೀರ್ಮಾನಿಸಿದವರು ವಾಚಾಳಿಯಾಗಿಬಿಡಬಲ್ಲರಾ? ಮನಸ್ಸಲ್ಲಿ ಕದಲುವ ಪ್ರತಿ ಭಾವವನ್ನೂ ಅಕ್ಷರಕ್ಕಿಳಿಸಿಬಿಡುವ, ಆ ಮೂಲಕ ತೀರಾ ಖಾಸಗಿಯಾದ ಭಾವವನ್ನು ಪ್ರದರ್ಶನದ ‘ಕಲೆ’ಯಾಗಿಸಿಬಿಡುವುದು ಒಳ್ಳೆಯದಾ? ಇವೆಲ್ಲಕ್ಕೂ ಉತ್ತರವನ್ನೂ ಸಹ ಅಕ್ಷರದ ಮೂಲಕವೇ ಕೇಳಿಕೊಳ್ಳುವ ಅನಿವಾರ್ಯತೆ ಇರುವುದು ನಮ್ಮ ಪರಿಸ್ಥಿತಿಯ ವ್ಯಂಗ್ಯವಲ್ಲವೇ? ನಮ್ಮೊಳಗಿನ ದನಿಗೆ ಅಭಿವ್ಯಕ್ತಿಕೊಡುವ ಮಾಧ್ಯಮವೂ ಕೂಡ ನಮ್ಮ ಚಟವಾಗಿಬಿಡಬಹುದೇ? ಅಕ್ಷರಗಳ ಮೋಹ ನಮ್ಮೊಳಗಿನ ದನಿಯನ್ನು ನಿರ್ಲಕ್ಷಿಸಿಬಿಡುವ ಅಪಾಯವಿದೆಯೇ? ಅಥವಾ ಇವೆಲ್ಲಕ್ಕೂ ಮನ್ನಣೆ, ಪ್ರಸಿದ್ಧಿ, ಹೆಸರುಗಳೆಂಬ ವಿಷಗಳು ಸೇರಿಕೊಂಡು ಬಿಟ್ಟಿವೆಯೇ?
ತುಂಬಾ ಬರೆಯುತ್ತಾ, ಯಾವಾಗಲೋ ಒಮ್ಮೆ ನಾನು ವಿಪರೀತ ವಾಚಾಳಿಯಾಗಿಬಿಟ್ಟೆನಾ ಅನ್ನಿಸತೊಡಗುತ್ತದೆ. ಅದರಲ್ಲೂ ಈ ಬ್ಲಾಗ್ ಬರಹಗಳಲ್ಲಿ ನನ್ನ ವೈಯಕ್ತಿಕ ಅನುಭವ, ವಿಚಾರ, ತಳಮಳಗಳನ್ನೇ ದಾಖಲಿಸುತ್ತಾ ಕೆಲವೊಮ್ಮೆ ನಾನು ಬರೀ ಮಾತುಗಾರನಾಗಿಬಿಟ್ಟೆನಾ ಎಂಬ ಭಯವಾಗುತ್ತದೆ. ನನ್ನ ಓದು ನಿಂತುಹೋಗಿಬಿಟ್ಟಿತಾ ಎಂಬ ಆತಂಕ ಕಾಡುತ್ತದೆ. ಈ ಸಕಲ ವ್ಯವಹಾರಗಳಿಗೂ ತಿಲಾಂಜಲಿಯಿತ್ತು ಕೆಲಕಾಲ ಎಲ್ಲಾದರೂ ಅಡಗಿಕೊಂಡು ಬಿಡಲಾ ಅನ್ನಿಸುತ್ತದೆ. ಬರೆಯುವುದನ್ನೆಲ್ಲಾ ಬಿಟ್ಟು ಓ ಹೆನ್ರಿಯ ಕಥೆಯಲ್ಲಿನ ಪಾತ್ರದ ಹಾಗೆ ಒಬ್ಬಂಟಿ ಕೋಣೆಯಲ್ಲಿ ಓದುತ್ತಾ, ಚಿಂತಿಸುತ್ತಾ, ಧ್ಯಾನಿಸುತ್ತಾ ಬದುಕು ಕಳೆದುಬಿಡಲಾ ಎನ್ನಿಸುತ್ತದೆ. ಹೀಗೆ ಬರೆಯುತ್ತಲೇ ಇದ್ದರೆ ನನ್ನ ತಿಳುವಳಿಕೆ, ಜ್ಞಾನ ಸೀಮಿತವಾಗಿಬಿಡುತ್ತದಾ ಎನ್ನಿಸುತ್ತದೆ. ಈ ಬಗೆಯ ಭಾವಗಳು ಕಾಡಿದಾಗ ಒಂದಷ್ಟು ದಿನ ಬ್ಲಾಗು ಬರೆಯುವುದನ್ನು ನಿಲ್ಲಿಸಿಬಿಟ್ಟಿದ್ದೇನೆ. ನಾವು ಗೆಳೆಯರು ನಡೆಸುತ್ತಿರುವ ಈ ಪತ್ರಿಕೆಗೆ ರಾಜೀನಾಮೆ ಕೊಟ್ಟುಬಿಟ್ಟಿದ್ದೇನೆ. ಒಂದೆರಡು ತಿಂಗಳು ಅದರಿಂದ ದೂರವಾಗಿಬಿಟ್ಟಿದ್ದೇನೆ. ಮತ್ತೆ ಅದನ್ನು ಅಪ್ಪಿಕೊಂಡಿದ್ದೇನೆ.
ಪರಿಸ್ಥಿತಿ ಬದಲಾಯಿಸಿತಾ? ಬ್ಲಾಗು ಬರೆಯುವುದನ್ನು ಬಿಟ್ಟಾಗ ನನಗೆ ತೃಪ್ತಿ ಸಿಕ್ಕಿತಾ? ಸಮಾಧಾನ ಎನ್ನುವುದು ಸಿಕ್ಕಿತಾ? ನನ್ನನ್ನು ನಾನು ನಿರಂತರವಾದ ಓದಿಗೆ, ಅಧ್ಯಯನಕ್ಕೆ ತೊಡಗಿಸಿಕೊಳ್ಳಲು ಸಾಧ್ಯವಾಯಿತಾ? ಖಂಡಿತಾ ಇಲ್ಲ. ಓದು ಅನ್ನೋದು ತೀರಾ ಖಾಸಗಿಯಾದ ಕ್ರಿಯೆಯೇ ಆದರೂ ಅದರಲ್ಲಿ ದೊರೆಯುವ ಸಂತೋಷವನ್ನು, ನಾನು ಕಂಡುಕೊಂಡ ಸಂಗತಿಗಳನ್ನು, ಅನುಭವಿಸಿದ ಬೆರಗನ್ನು ಹಂಚಿಕೊಳ್ಳಬೇಕು ಎನ್ನುವ ಹಂಬಲವನ್ನು ಹತ್ತಿಕ್ಕಲು ಸಾಧ್ಯವಾಗುವುದಿಲ್ಲ. ಬರೆಯುವಾಗ ನಾನು ಅದುವರೆಗೂ ಆಲೋಚಿಸಿರದಿದ್ದ ಅನೇಕ ಒಳನೋಟಕಗಳು ದಕ್ಕಿದಂತಾಗಿ ಪುಳಕಗೊಳ್ಳುವ ಸುಖವನ್ನು ಬಿಡಲು ಸಾಧ್ಯವಾಗುವುದಿಲ್ಲ. ಸೃಜನಶೀಲತೆಯಲ್ಲಿ ಸಿಕ್ಕುವ ಸಮಾಧಾನವನ್ನು ಕಳೆದುಕೊಂಡು ಇರುವುದು, ಪ್ರತಿದಿನ ರುಚಿ ರುಚಿಯಾಗಿ ತಿನ್ನುತ್ತಿದ್ದವನಿಗೆ ಒಮ್ಮೆಗೇ ಸಪ್ಪೆ ಊಟ ಹಾಕಲು ಶುರುಮಾಡಿದ ಹಾಗಾಗುತ್ತದೆ. ಬಹುಶಃ ಸ್ವಂತ ಅಭಿವ್ಯಕ್ತಿಗೆ, ನಮ್ಮವೇ ಆದ ಸೃಷ್ಠಿಗೆ ಯಾವ ಅವಕಾಶವನ್ನೂ ಕೊಡದೆ ಕೇವಲ ಹೊರಗಿನಿಂದ ಒಳಗೆ ಫೀಡ್ ಮಾಡಿಕೊಳ್ಳಬೇಕಾದ ನಮ್ಮ ಈ ಶಿಕ್ಷಣ ವ್ಯವಸ್ಥೆಯಿಂದಾಗಿ ಸಣ್ಣ ಸಣ್ಣ ಸೃಜನಶೀಲ ಕೆಲಸಗಳಲ್ಲೂ ಅಪಾರವಾದ ಖುಷಿ ಸಿಕ್ಕುತ್ತದೆಯೇನೋ! ಈ ಸಣ್ಣ ಖುಶಿ, ಅಹಂಕಾರಕ್ಕೆ ಸಿಕ್ಕುವ ಬೆಚ್ಚಗಿನ ಪ್ರೋತ್ಸಾಹಗಳನ್ನು ತೊರೆಯುವುದು ರಾಜಕಾರಣಿ ಕುರ್ಚಿಯ ಮೇಲಿನ ಆಸೆಯನ್ನು ಬಿಟ್ಟಂತೆಯೇ ಏನೋ! ಈ ನಮ್ಮ ಹಪಹಪಿಗೆ ಒಂದು ಗೌರವಯುತವಾದ ಸ್ಥಾನವಿದೆ ಆದರೆ ಅಧಿಕಾರದ ಮೇಲಿನ ಹಂಬಲಕ್ಕೆ ಅದಿಲ್ಲ ಅಷ್ಟೇ ವ್ಯತ್ಯಾಸ!
ಬ್ಲಾಗಿಂಗ್ ಕೂಡಾ ಚಟವಾಗುತ್ತಿದೆ ಎಂಬ ಇತ್ತೀಚಿನ ಕೆಲವು ಇಂಗ್ಲೀಷ್ ಪತ್ರಿಕೆಗಳ ವರದಿಗಳಲ್ಲಿನ ವೈಜ್ಞಾನಿಕ ಕಾರಣಗಳನ್ನು ಅವಲೋಕಿಸುವಾಗ ಇದೆಲ್ಲಾ ಹೊಳೆಯಿತು. ಆದರೆ ಇದನ್ನೆಲ್ಲಾ ಬರೆಯುತ್ತಾ ಹೋದಂತೆ ಹಲವು ಸಂಗತಿಗಳು ಸ್ಪಷ್ಟವಾಗುತ್ತಾ ಹೋದವು. ನಾವು ಬರೆಯುವುದು ನಮ್ಮೊಳಗೆ ಸ್ಪಷ್ಟತೆಯನ್ನು ಸ್ಥಾಪಿಸಿಕೊಳ್ಳುವುದಕ್ಕಾ?
Recent Comments