ಕಲರವ

ಆತ್ಮಕತೆಗಳ ಜಾಡು ಹಿಡಿದು- ಇನ್ನೊಂದು ಆತ್ಮಕತೆಯ ಸುತ್ತ!

Posted by: ರಂಜಿತ್ on: June 30, 2009

- ಹೇಮಾ ಪವಾರ್, ಬೆಂಗಳೂರು.
ಆತ್ಮಕತೆಗಳಲ್ಲಿ ಇರುವುದೆಲ್ಲವೂ ಸತ್ಯವಾ? ಸುಳ್ಳಾದರೂ ಅದನ್ನು ಪರೀಕ್ಷಿಸಲು ಬರದು
ಅಲ್ಲವೇ? ಅದೇಕೋ ಈ ಪ್ರಶ್ನೆ ತಲೆಯನ್ನು ಹೊಕ್ಕಿ ಕುಂತಿತು. ಇಷ್ಟಕ್ಕು ಒಬ್ಬ ಮನುಷ್ಯ
ತನ್ನ ಆತ್ಮಕತೆಯಲ್ಲಿ ಸತ್ಯವನ್ನೇ ನುಡಿಯಬೇಕೆಂದು ಅಪೇಕ್ಷಿಸುವುದೇ ದೊಡ್ಡ ಮೂರ್ಖತನ.
ಸತ್ಯಕ್ಕೊಂದು ಪರಿಧಿ ಹಾಕಿ ಇದರಾಚೆಗಿನದೆಲ್ಲ ಸುಳ್ಳು ಎಂದು ಹೇಳಲು ಬರುವುದೇ?
ಘಟನೆಗಳು, ಅನುಭವಗಳು, ದಾಖಲಾಗುತ್ತವೆ. ಅದರ ಸತ್ಯಾಸತ್ಯತೆ ಬರೆದವರನ್ನು ಕಾಡುತ್ತದೆ.
ಆತ್ಮಸಾಕ್ಷಿಗೆ ಹೆದರುವವರೆಲ್ಲರು ಸತ್ಯವನ್ನೇ ದಾಖಲಿಸುತ್ತಾರೆ ಎಂಬ ಮಾತುಗಳೆಲ್ಲ
ಎಷ್ಟು ಸಿನಿಕವೆನ್ನಿಸತೊಡಗಿತು. ಒಂದು ಘಟನೆಗೆ ಸಂಬಂಧಪಟ್ಟಂತೆ ವ್ಯಕ್ತಿಯೊಬ್ಬ
ತನ್ನದೇ ಅಭಿಪ್ರಾಯಗಳನ್ನು ಹೊಂದಿರುತ್ತಾನೆ, ಅದೂ ಅವನವೇ ಎಂಬುದಕ್ಕೆ ಏನು ಸಾಕ್ಷಿ
ತಂದುಕೊಡಬಲ್ಲ? ಅವನ ಯೋಚನೆಗೆ ನಿಲುಕಬಲ್ಲಷ್ಟು ಪ್ರಾಮಾಣಿಕ ಅಭಿಪ್ರಾಯಗಳನ್ನು
ದಾಖಲಿಸಬಲ್ಲನೆಂದರೆ, ಅಭಿಪ್ರಾಯಗಳ ಪ್ರಾಮಾಣಿಕತೆಯ ಮೇಲೆ ಅವನು ಘಟನೆಯ ಬಗ್ಗೆ ನೀಡಿದ
ವಿವರಗಳನ್ನು ಸತ್ಯ ಸುಳ್ಳು ಎಂದು ವರ್ಗೀಕರಿಸಬಹುದೇ? ಹೀಗೇ ಯೋಚಿಸುತ್ತಿದ್ದೆ.
ನನ್ನನ್ನು ಸದಾ ಕಾಡುವ, ಯೋಚನೆಗೆ ಹಚ್ಚುವ, ನಾನರಿಯದ ವ್ಯಕ್ತಿಗಳನ್ನು ಪರಿಚಯಿಸುವ
ಆತ್ಮ ಕಥನಗಳು ನನಗೆ ಇನ್ನಷ್ಟು ಆಪ್ತವಾಗುತ್ತಿವೆ. ಈ ಸಲದ ಆತ್ಮಕತೆಗಳ ಸರಣಿಯಲ್ಲಿ
ನಾನು ಬರೆಯುತ್ತಿರುವುದು ’ದಾದಾಗಿರಿಯ ದಿನಗಳ’ ಬಗ್ಗೆ ಇದು ’ಅಗ್ನಿ’  ಪತ್ರಿಕೆಯ
ಸಂಪಾದಕ ಶ್ರೀಧರ್ ರ ಆತ್ಮಕತೆ. ಇದರ ಮೊದಲ ಭಾಗವಷ್ಟೇ ಓದಿದ್ದೇನೆ, ಇನ್ನೂ ಎರಡು
ಭಾಗಗಳು ಬಾಕಿ ಇವೆ ಆದ್ದರಿಂದ ಬರೆಯಲೋ ಬೇಡವೋ ಎಂಬ ಗೊಂದಲದಲ್ಲೇ, ಬರೆಯದೆ ಇರಲು
ಸಾಧ್ಯವಿಲ್ಲವೆನಿಸಿ ಬರೆಯುತ್ತಿದ್ದೇನೆ.

ಆತ್ಮಕತೆಗಳನ್ನು ಯಾರ್ಯಾರು ಬರೆಯಬಹುದು? ಯಾರಾದರೂ ಬರೆಯಬಹುದು. ಆದರೂ ಎಲ್ಲರೂ
ಬರೆಯುವುದಿಲ್ಲ ಏಕೆ? ತಮ್ಮ ಜೀವನದಲ್ಲಿ ದಾಖಲಿಸಲು ಅರ್ಹವೆನಿಸುವಂತಹ ಘಟನೆಗಳು
ನಡೆದಿದ್ದರೆ ಸಾಮಾನ್ಯವಾಗಿ ಆತ್ಮಕತೆಗಳನ್ನು ಬರೆದುಕೊಳ್ಳುತ್ತಾರೆ. ದಾಖಲಿಸಲ್ಪಟ್ಟ
ಘಟನೆಗಳು ಪೂರ್ತಿಯಾಗಲ್ಲದಿದ್ದರೂ ಎಲ್ಲೋ ಒಂದು ಕಡೆ ಬರೆಯುತ್ತಿರುವವನ
ಒಳ್ಳೆಯತನಗಳನ್ನೋ ಸಾಧನೆಗಳನ್ನೋ ಪ್ರತಿಬಿಂಬಿಸುತ್ತವೆ. ಇದು ಲೋಕಾರೂಢಿ. ಆದರೆ
ದಾದಾಗಿರಿಯ ದಿನಗಳಲ್ಲಿ ನಾನು ಕಂಡಿದ್ದು ಶ್ರೀಧರರ ಕನ್ಪೆಶನ್. ಅವರ ಮನಸ್ಸು ಬರವಣಿಗೆ
ಎಡೆಗೆ ಪಲ್ಲಟಗೊಳ್ಳುವವರೆಗೂ ಅವರೊಂದಿಗೆ ನಡೆದ ಘಟನೆಗಳು ಯಾವ ಸಿನಿಮಾಕ್ಕಿಂತ ಕಡಿಮೆ
ಇಲ್ಲ. ಅತ್ಯಂತ ರಂಜಕವಾಗಿ, ವಿಜೃಂಬಿಸಿ ಬರೆದಿದ್ದರೆ ಅದೊಂದು ಬೆಸ್ಟ್ ಸೆಲ್ಲರ್
ಪುಸ್ತಕವಾಗುತ್ತಿತ್ತೋ ಏನೋ, ಆದರೆ ಶ್ರೀಧರ್ ಎಲ್ಲೂ ಎಲ್ಲೆ ಮೀರಿಲ್ಲ. ತಮ್ಮ
ಒಳ್ಳೆಯತನಗಳನ್ನು ಸಾಬೀತುಪಡಿಸಹೊರಟಿಲ್ಲ, ಅಲ್ಲಿರುವುದು ಘಟನೆಗಳ ನೇರ ವಿವರ, ಅವುಗಳು
ಜರಗುವಾಗಿನ ಅವರ ಮನಸ್ಥಿತಿ,  ತಪ್ಪೊಪ್ಪಿಗೆ ಮತ್ತು ಪಶ್ಚಾತಾಪ. “ನನ್ನ
ಬದುಕಿನಲ್ಲೊಂದು ಕಾಲವಿತ್ತು. ನನ್ನ ಪ್ರತಿಯೊಂದು ಗಳಿಗೆಯನ್ನು ಅಪರಿಚಿತ ಕಣ್ಣುಗಳು
ಹಿಂಬಾಲಿಸುತ್ತಿದ್ದವು. ಕಾಣದ ಕಿವಿಗಳು ಕೇಳಿಸಿಕೊಳ್ಳುತ್ತಿದ್ದವು. ಅದೊಂದು ಪಾತಕಿಗಳ
ಭೀಕರ ಪ್ರಪಂಚವೆಂದು ತಳ್ಳಿ ಹಾಕುವ ಹಾಗಿರಲಿಲ್ಲ. ಪಾತಕಿಗಳಲ್ಲಿ ನಾನೂ
ಒಬ್ಬನಾಗಿದ್ದೆ. ಭೀಕರತೆಯಲ್ಲಿ ನನ್ನ ಕೊಡುಗೆಯೂ ಇತ್ತು” ಎಂದು ಶುರುವಿಡುತ್ತಾರೆ.
೧೯೭೦-೮೦ ರ ಪಾತಕಪ್ರಪಂಚದ ಬಗ್ಗೆ  ಬೆಚ್ಚಿಬೀಳಿಸುವ ಒಂದೊಂದೂ ವಿವರವೂ ಅವರ
ಆತ್ಮಕತೆಯಲ್ಲಿ ದಾಖಲಾಗಿದೆ, ಅದರಲ್ಲಿ ಶ್ರೀಧರ್ ರ ಪಾತ್ರವೂ ಇತ್ತೆಂಬುದು
ನಂಬಲಸಾಧ್ಯವಾದ ಸತ್ಯ.

IMG_6284

’ಲಾ’ ಓದಿದ್ದ, ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ಎಲ್ಲ ಅವಕಾಶಗಳು ಇದ್ದ ಅವರನ್ನು
ಪಾತಕ ಪ್ರಪಂಚ ಸೆಳೆದದ್ದು ಒಂದು ವಿಚಿತ್ರ. ಒಂದೊಮ್ಮೆ ಅಲ್ಲಿಗೆ ಕಾಲಿಟ್ಟ ಮೇಲೆ
ಹೊರಬರಲಾಗದ ಅನಿವಾರ್ಯತೆ, ಪಾತಕ ಲೋಕದಲ್ಲೆ ಇನ್ನೂ ಹೆಚ್ಚು ಹೆಚ್ಚು ಆಳಕ್ಕಿಳಿಯಬೇಕಾದ
ಸಂಧರ್ಭಗಳು, ತಪ್ಪು ಮತ್ತು ಸರಿಯಲ್ಲಿನ ದ್ವಂದ್ವಗಳೆಲ್ಲವನ್ನು ಅದೆಷ್ಟು ಚೆನ್ನಾಗಿ
ಪದಗಳಲ್ಲಿ ಕಟ್ಟಿಕೊಟ್ಟಿದ್ದಾರೆಂದರೆ, ಪಾತಕಿಯಾಗಿದ್ದವನ ಕೈಯಲ್ಲರಳಿದ ಕೃತಿಯೇ ಇದು
ಅನಿಸಿಬಿಡುತ್ತದೆ. “ಪಾತಕ ಪ್ರಪಂಚದಿಂದ ನಾನು ಕಳಚಿಕೊಳ್ಳಲೇ ಬೇಕಿತ್ತು. ಆದರೆ
ಕಳಚಿಕೊಳ್ಳುವುದಾದರೂ ಹೇಗೆ? ಆ ಪ್ರಶ್ನೆಯ ತುಡಿತ ನನ್ನನ್ನು ಬರವಣಿಗೆಯ ಜಗತ್ತಿಗೆ
ದೂಡಿತು. ಆ ಪ್ರಕ್ರಿಯೆ ಎದೆಯಾಳದಲ್ಲಿ ವಿಚಿತ್ರ ಘರ್ಷಣೆಯನ್ನು ಹುಟ್ಟಿಸತೊಡಗಿತು.
ತಣ್ಣನೆಯ ಕ್ರೂರಿಗಳು ಅಸಹಾಯಕರಂತೆ ಗೋಚರವಾಗತೊಡಗಿದರು. ಶಿಷ್ಠರು ಮತ್ತು ದುಷ್ಠರ
ನಡುವಿನ ವ್ಯತ್ಯಾಸ ತೆಳುವಾಗುತ್ತ ಹೋಯಿತು. ಎಲ್ಲಾರೂ ಒಂದೇ ದೋಣಿಯಲ್ಲಿ ಸಾಗುತ್ತಿರುವ
ಸಹಪ್ರಯಾಣಿಕರೆನ್ನುವ ಅರಿವು ಮನಸ್ಸನ್ನು ಆಕ್ರಮಿಸತೊಡಗಿತು. ಬರಹ ನನ್ನ ಹಾದಿಯನ್ನು
ಬದಲಿಸತೊಡಗಿತು. ಬದಲಾದ ಹಾದಿ ಹೆಚ್ಚು ಹೆಚ್ಚು ಆಪ್ತವಾಗಿ ಆಶವಾಗಿ ಬರವಣಿಗೆಯಲ್ಲಿ
ತೊಡಗುವಂತೆ ಪ್ರೇರೇಪಿಸಿತು. ಈಗ ನಿಮ್ಮ ಮುಂದೆ ನಿಂತಿದ್ದೇನೆ
ಸಂಪೂರ್ಣವಾಗಲ್ಲದಿದ್ದರೂ ಸಾಕಷ್ಟು ಬೆತ್ತಲೆಯಾಗಿ” ಹೀಗೆ ಅವರ ಮನಸ್ಸು ಕ್ರೈಂ ನಿಂದ
ಬರವಣಿಗೆಗೆ ಹೊರಳಿದ್ದನ್ನು ವಿವರಿಸುತ್ತಾರೆ. ವಿಖ್ಯಾತರದ್ದಷ್ಟೇ ಆತ್ಮಕತೆಗಳು
ಓದಿಸಿಕೊಳ್ಳುತ್ತವೆ ಎಂಬ ನನ್ನ ಭಾವನೆ ಸಂಪೂರ್ಣವಾಗಿ ಕೊಚ್ಚಿಹೋಗಿದ್ದು, ಕೊತ್ವಾಲ್
ಕೊಲೆಯಲ್ಲಿ ಅವರು ಭಾಗಿಯಾಗಿದ್ದಾಗಿನ ವಿವರಗಳನ್ನು ಓದ ತೊಡಗಿದಾಗ, ಬೇಡ
ಬೇಡವೆಂದುಕೊಂಡಿದ್ದ ಕೊತ್ವಾಲನ ಕೊಲೆಯು ಜರುಗಿಯೇ ಬಿಟ್ಟಾಗ ಅದೊಂದು ಕ್ಷಣ ನನ್ನ
ಸುತ್ತಲಿನ ಜಗತ್ತೇ ನಿಂತಂತೇ ಭಾಸವಾಗಿದ್ದು ಸುಳ್ಳಲ್ಲ. ನನಗೆ ತಿಳಿದಂತೆ ಅಷ್ಟು
ತನ್ಮಯಳಾಗಿ ಬೇರಾವ ಕೃತಿಯನ್ನು ಬಹುಶಃ ನಾನು ಓದಿಲ್ಲ.

’ಕಲೆಯ ಶ್ರೇಷ್ಟತೆ ಇರುವುದು ವಸ್ತುಗಳ ಅಭಿವ್ಯಕ್ತಿಯಲ್ಲಿ ವಸ್ತುಗಳ
ಮೌಲ್ಯಮಾಪನದಲ್ಲಲ್ಲ’ ಹೀಗಾಗಿಯೇ ಒಂದು ಕೊಲೆಯ ವಿವರಗಳನ್ನೂ ಕೂಡ ಅದ್ಬುತವಾಗಿ
ಅಭಿವ್ಯಕ್ತಿಸಬಹುದು. ಆದರೆ ಇದೆಲ್ಲದರ ಆಚೆ ನಿಂತು ಮಾನವೀಯ ಮೌಲ್ಯಗಳಿಂದ ನೋಡಿದಾಗ
ಕೊಲೆಯು ಪರಿತಪಿಸಿ ಸುಮ್ಮನಾಗಿಬಿಡುವ ಒಂದು ಕ್ರಿಯೆಯೇ ಎಂಬ ಪ್ರಶ್ನೆ ಕಾಡುತ್ತದೆ.
’ಒಬ್ಬ ವ್ಯಕ್ತಿಯು ಸಾವಿರ ಬಾರಿ ಸಾಯುವಂತಹ ತಪ್ಪು ಮಾಡಬಹುದು, ಆದರೆ ಯಾರಿಗೂ
ಒಬ್ಬನನ್ನು ಕೊಲ್ಲುವಷ್ಟು ಅಧಿಕಾರವಾಗಲೀ ನೈತಿಕತೆಯಾಗಲೀ ಇರುವುದಿಲ್ಲ’ ಎಂದು ಎಲ್ಲೋ
ಓದಿದ ನೆನಪು. ಬಹುಶಃ ಶ್ರೀಧರ್ ಮನಸ್ಸಿನಲ್ಲಿ ಈ ಭಾವವಿತ್ತೆಂದು ಕಾಣುತ್ತದೆ.
ಪಶ್ಚತಾಪವು ಒಮ್ಮೆ ಅನುಭವಿಸಿ ಮುಗಿಸಿಬಿಡುವಂತಹ ಕ್ರಿಯೆಯಲ್ಲ. ಅದು ನಿರಂತರವಾಗಿ
ಕಾಡುತ್ತಲೇ ಇರುವ, ಅನುಭವಿಸುತ್ತಲೇ ಬದುಕಬೇಕಾದ ಮನಸ್ಥಿತಿ. ನಾನು ತಪ್ಪು
ಮಾಡಿಬಿಟ್ಟಿದ್ದೇನೆ, ಅದಕ್ಕೆ ಪಶ್ಚಾತಾಪವಾಗಿದೆ, ನನ್ನನ್ನು ಕ್ಷಮಿಸಿಬಿಡಿ ಎಂದು
ಅವರೆಲ್ಲೂ ಕೇಳಿಕೊಂಡಿಲ್ಲ, ಪ್ರಾಮಾಣಿಕ ವಿವರಗಳೊಡನೆ ತಾವು ಮಾಡಿದ ತಪ್ಪನ್ನೆಲ್ಲ
ತೆರೆದಿಟ್ಟಿದ್ದಾರೆ ಅದನ್ನೋದಿ ಓದುಗನ ಮನಸ್ಸಿನಲ್ಲಿ ಮೊಳೆಯಬಹುದಾದ ಭಾವನೆಗಳನ್ನು
ಅವರು ಅಂದಾಜಿಸ ಬಲ್ಲರು, ಒಂದು ಕೊಲೆ ಯಾವುದೇ ರೀತಿಯಲ್ಲೂ ಸಮರ್ಥಿಸಿಕೊಳ್ಳಲಾರದ್ದು
ಎಂಬುದನ್ನು ಅರಿತೇ ಅವರು ಬರೆಯತೊಡಗಿದ್ದಾರೆ. ಹಾಗಾಗಿಯೇ ’ದಾದಾಗಿರಿಯ ದಿನಗಳು’
ಎಲ್ಲೂ ಸಿನಿಕವೆನ್ನಿಸದೆ ಓದಿಸಿಕೊಳ್ಳುತ್ತದೆ. ಕೇವಲ ಒಂದು ಆತ್ಮಕತೆಯಾಗಷ್ಟೆ
ಅಲ್ಲದೇ, ಮಾನವನ ಗುಣದಲ್ಲಾಗುವ ವೈರುಧ್ಯದ ಪ್ರತೀಕದಂತೆ ಮನಸ್ಸಿನಲ್ಲುಳಿಯುತ್ತದೆ.

Leave a Reply

Blog Stats

  • 13,971 hits

 

June 2009
M T W T F S S
« May   Jul »
1234567
891011121314
15161718192021
22232425262728
2930